ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಅವರ ಪಾತ್ರವೇನು..?

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಅವರ ಪಾತ್ರವೇನು..?





ನಟ ತೂಗುದೀಪ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅವರನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಹತ್ಯೆ ಮಾಡಿದ ಘಟನೆಯಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿ ಇವರನ್ನು ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.


ಈ ಕೃತ್ಯದಲ್ಲಿ ಮತ್ತು ಘಟನೆಯಲ್ಲಿ ನಟ ದರ್ಶನ್ ಮತ್ತು ಆತನ ಗೆಳತಿಯ ಪಾತ್ರವೇನು..? ಎಂಬ ವಿಷಯದ ಬಗ್ಗೆ ಭಾರೀ ಚರ್ಚೆಗಳಾಗುತ್ತಿವೆ.


ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಅಂಗರಕ್ಷಕರು ಸಹಿತ 13 ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರು ದಿನಗಳ ಕಾಲ ಪೊಲಿಸ್ ಕಸ್ಟಡಿಗೆ ನೀಡಲಾಗಿದೆ. 



ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರಿಸಿದ್ದು, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ ಚನ್ನಬಸಪ್ಪ ಗೌಡರ್ ಅವರು 13 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವ ಆದೇಶ ಹೊರಡಿಸಿದರು.


ಪ್ರಕರಣದಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಮೊದಲನೇ ಆರೋಪಿ. ನಟ ದರ್ಶನ್ ತೂಗುದೀಪ ಎರಡನೇ ಆರೋಪಿಯಾಗಿದ್ದಾರೆ. ಇತರ ಆರೋಪಿಗಳ ಹೆಸರು ಹೀಗಿವೆ, ಕೆ. ಪವನ್, ನಂದೀಶ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯ್ಕ್‌, ಎಂ. ಲಕ್ಷ್ಮಣ, ದರ್ಶನ್ ಅಭಿಮಾನಿ ಸಂಘದ ಚಿತ್ರದುರ್ಗ ಘಟಕದ ಅಧ್ಯಕ್ಷ ರಾಘವೇಂದ್ರ ಆಲಿಯಾಸ್ ರಾಘು, ಆರ್. ನಾಗರಾಜು, ಎಂ. ದೀಪಕ್.


ಹತ್ಯೆ ಹೇಗೆ ನಡೆಯಿತು?

ದರ್ಶನ್ ಗೆಳತಿ ಪವಿತ್ರಾ ಗೌಡ ಅವರಿಗೆ ಇನ್ಸ್‌ಗ್ರಾಮ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದರು. ಈ ಬಗ್ಗೆ ಪವಿತ್ರಾ ಗೌಡ ತನ್ನ ಗೆಳೆಯ ದರ್ಶನ್ ಅವರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಲು ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಜೂನ್ 8ರಂದು ಬೆಂಗಳೂರಿಗೆ ಕರೆಸಿಕೊಂಡ ದರ್ಶನ್ ಮತ್ತವರ ತಂಡ, ಪಟ್ಟಣಗೆರೆಯ ನಿರ್ಜನ ಪ್ರದೇಶದಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.


ಘಟನೆಯಲ್ಲಿ ಗಂಭೀರ ಪೆಟ್ಟು ತಿಂದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ಬಳಿಕ ಅವರ ಶವವನ್ನು ತಡರಾತ್ರಿ ಕಾಮಾಕ್ಷಿಪಾಳ್ಯದ ಸಮೀಪದ ರಾಜಾಕಾಲುವೆಯಲ್ಲಿ ಎಸೆಯಲಾಗಿತ್ತು.


ಸ್ಥಳೀಯರು ಈ ಅನಾಥ ಶವವನ್ನು ನೋಡಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹತ್ಯೆ ಪ್ರಕರಣದ ತನಿಖೆಯನ್ನು ಕ್ಷಿಪ್ರವಾಗಿ ಕೈಗೊಂಡು ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಬಂಧಿಸಿದ್ದರು. ಆ ಬಳಿಕ, ಮಧ್ಯಾಹ್ನದ ವೇಳೆಗೆ ಪವಿತ್ರಾ ಗೌಡ ಅವರನ್ನು ಬಂಧಿಸಲಾಯಿತು. ಸಂಜೆಯ ವೇಳೆಗೆ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು.